ಯಾರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಪ್ರತಾಪ್ ಹೇಳಲಿ: ಸಿಎಂ
“ನನ್ನ ರಾಜಕೀಯ ಜೀವನದಲ್ಲಿ ವಿರೋಧ ಪಕ್ಷದವರೊಂದಿಗೆ ಮಾತೂ ಆಡುವುದಿಲ್ಲ ಅಧಿಕಾರದಲ್ಲಿದ್ದಾಗ ಅವರ ಮನೆಗೂ ಹೋಗುವುದಿಲ್ಲ. ಅವರು ಬಂದರೆ ಸೌಜನ್ಯಕ್ಕಾಗಿ ಮಾತನಾಡುತ್ತೇನೆ. ಆದರೆ ರಾಜಕೀಯ ಮಾತನಾಡುವುದಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬಿಜೆಪಿಯ ಕೆಲವು ನಾಯಕರು ಕಾಂಗ್ರೆಸ್ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ಸಂಸದ ಪ್ರತಾಪ್ ಹೇಳಿಕೆಗೆ ಸಿದ್ದರಾಮಯ್ಯ ಮೇಲಿನಂತೆ ಹೇಳಿದ್ದಾರೆ.
ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ರಾಜಕೀಯ ಪ್ರಬುದ್ಧತೆಯಿಲ್ಲ. ಪ್ರತಾಪ್ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಬೆಂಗಳೂರು ರಸ್ತೆ ತಾವೇ ಮಾಡಿಸಿದ್ದು ಎನ್ನುತ್ತಾರೆ. ಬೆಂಗಳೂರು ರಸ್ತೆಗೆ ಅವರು ಸಂಸದರೇ ಎಂದು ಪ್ರಶ್ನಿಸಿದರು.
ಯಾರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಹೇಳಬೇಕು. ಯಾರು ಎಂದು ಅವರಿಗೆ ಗೊತ್ತಿರಬೇಕಲ್ಲ ಮಾಹಿತಿ ಇದ್ದರೆ ಹೇಳಲಿ ಎಂದು ಸಿದ್ದರಾಮಯ್ಯ ಹೇಳಿದರು.
ರಾಜ್ಯಪಾಲರಿಗೆ ದೂರು ಕೊಡುವುದಾದರೆ ಕೊಡಲಿ. ಪೇ ಸಿಎಂ ಕುರಿತು ತನಿಖೆ ಮಾಡಿಸಲು ಹೇಳಿರಲಿಲ್ಲ. ತನಿಖೆಯನ್ನು ಯಾವಾಗ, ಯಾರಿಂದ ಎಷ್ಟು ಹೊತ್ತಿಗೆ ಮಾಡಿಸಬೇಕು ಎನ್ನುವುದು ನಮಗೆ ಸೇರಿದ್ದು ಎಂದರು.
ಮಂಗಳವಾರ ಬಿಬಿಎಂಪಿ ಸಭೆಯಲ್ಲಿ ಕರ್ನಾಟಕ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರು ಭಾಗಿಯಾಗಿರುವ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಮುಖ್ಯಮಂತ್ರಿ, ಅದು ಅಧಿಕೃತ ಸಭೆಯಲ್ಲ. ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ ಕರೆದಿದ್ದ ಸಭೆಯಲ್ಲಿ ಪ್ರಾಸಂಗಿಕವಾಗಿ ಬಿಬಿಎಂಪಿ ಚುನಾವಣೆ ಬಗ್ಗೆಯೂ ಮಾತನಾಡಿದ್ದಾರೆ. ಹೆಬ್ಬಾಳ ಮೇಲ್ಸೇತುವೆ ನೋಡಲು ಹೋಗುತ್ರಿದ್ದ ಸಂದರ್ಭದಲ್ಲಿ ಕುಳಿತಿದ್ದಾರೆ. ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವರು, ಶಾಸಕರನ್ನು ಭೇಟಿ ಮಾಡಿದ್ದು, ಕಾನೂನು ಅಭಿಪ್ರಾಯ ಪಡೆಯಲು ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದರು.